Jammu And Kashmir: ಪುಲ್ವಾಮಾದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತನನ್ನು ಹೊಡೆದುರುಳಿಸಿದ ಕೆಲವು ದಿನಗಳ ನಂತರ, ಮಂಗಳವಾರ ಮುಂಜಾನೆ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಎನ್ಕೌಂಟರ್ನಲ್ಲಿ ಕೊಂದಿವೆ.
ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಯೋಧರು ಹೊಡೆದುರುಳಿಸಿದ್ದಾರೆ. ಇತ್ತೀಚೆಗಷ್ಟೇ ಕಾಶ್ಮೀರಿ ಪಂಡಿತನೊಬ್ಬನ ಮೇಲೆ ದಾಳಿ ನಡೆದಿದ್ದು, ಓರ್ವ ಕಾಶ್ಮೀರಿ ಪಂಡಿತನನ್ನು ಹತ್ಯೆ ಮಾಡಲಾಗಿತ್ತು. ಕೂಡಲೇ ಸೇನೆ ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿತು. ಮಂಗಳವಾರ ಮುಂಜಾನೆ ಅವಂತಿಪೋರಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಕೊಲ್ಲುವಲ್ಲಿ ಸೇನೆ ಯಶಸ್ವಿಯಾಗಿದೆ.
ಭಾನುವಾರ ಮುಂಜಾನೆ, ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರ ಮೇಲೆ ಗುಂಡು ಹಾರಿಸಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಂಜಯ್ ಶರ್ಮಾ ಜಮ್ಮು ಮತ್ತು ಕಾಶ್ಮೀರದ ಬ್ಯಾಂಕ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಕಣಿವೆಯಲ್ಲಿ ನಡೆದ ಮತ್ತೊಂದು ಉದ್ದೇಶಿತ ಹತ್ಯೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಅಚಾನ್ ಪ್ರದೇಶದ ತಮ್ಮ ಗ್ರಾಮದಲ್ಲಿ ಸಶಸ್ತ್ರ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಶರ್ಮಾ ಅವರನ್ನು ಬೆಳಗ್ಗೆ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ದಾಳಿಕೋರರನ್ನು ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.